Jul 16, 2009

ಗಾಂಧಿ ಜಯಂತಿ ಕಥಾಸ್ಪರ್ಧೆ- 2009

ಕಳೆದ ವರ್ಷ ವಿಕ್ರಾಂತ ಕರ್ನಾಟಕದ ಸಹಯೋಗದೊಂದಿಗೆ ಈ ಕಥಾಸ್ಪರ್ಧೆ ಪ್ರಾಯೋಜಿಸಿದ್ದೆ. ಇದು ಈ ವರ್ಷವೂ ಮುಂದುವರೆಯುತ್ತಿದೆ. ವಿವರಗಳು ಈ ಕೆಳಗಿನ ಚಿತ್ರದಲ್ಲಿದೆ. (ಅದನ್ನು ಕ್ಲಿಕ್ ಮಾಡಿದರೆ ಅದು ದೊಡ್ಡದಾಗಿ ತೆರೆದುಕೊಳ್ಳುತ್ತದೆ.) ಆಸಕ್ತರು ಮತ್ತು ಕತೆಗಾರರು ಗಮನಿಸಬೇಕಾಗಿ ವಿನಂತಿ.



ಕಳೆದ ವರ್ಷ ಈ ಪ್ರಯುಕ್ತ ಬರೆದಿದ್ದ ಬ್ಲಾಗ್ ಲೇಖನ ಇಲ್ಲಿದೆ:
ಗಾಂಧಿ ಜಯಂತಿ ಕಥಾಸ್ಪರ್ಧೆ - 2008

ಆ ಕಥಾಸ್ಪರ್ಧೆಯಲ್ಲಿ ಗೆದ್ದ ಕತೆಗಳು ಇಲ್ಲಿ (ವಿಚಾರಮಂಟಪ.ನೆಟ್) ಓದಲು ಲಭ್ಯವಿವೆ.

Jul 9, 2009

ಪ್ರತಿಭಾ ನಂದಕುಮಾರರ "ದೇವಿ" - ಹೊಡೆದು ಕೆಡವಿ ದಕ್ಕಿಸಿಕೊಳ್ಳಲಾರಿರಿ

ಪ್ರತಿಭಾ ನಂದಕುಮಾರ್ ಕನ್ನಡದ ಸಮಕಾಲೀನ ಕವಯತ್ರಿಯರಲ್ಲಿ ಪ್ರಮುಖರು. Firebrand ಕವಯತ್ರಿ ಪಟ್ಟದಿಂದ ಹಿರಿಯ ಕವಿ-ಲೇಖಕಿಯಾಗಿ ಅವರು ರೂಪಾಂತರಗೊಳ್ಳುತ್ತಿರುವ ಸಂದರ್ಭ ಇದು. ಪ್ರತಿಭಾ ಕೇವಲ ತಮ್ಮ ವೈಯಕ್ತಿಕ ಕಷ್ಟನಷ್ಟದ ಬಗ್ಗೆಯೇ ಬರೆದುಕೊಂಡವರಲ್ಲ. ಹಾಗೆಯೆ ಕೇವಲ ಕಾವ್ಯ, ರಸ, ರಸಾನುಭೂತಿ, ಮುಂತಾದ ಯಾರ ಉಸಾಬರಿಗೂ ಹೋಗದ ವಿಷಯಗಳಲ್ಲಿ ಮುಳುಗಿದವರೂ ಅಲ್ಲ. ಅವರು ಕಾಲಕಾಲಕ್ಕೆ ಸಮಕಾಲೀನ ಸಾಮಾಜಿಕ ಘಟನೆಗಳಿಗೆ ಸ್ಪಂದಿಸುತ್ತ ಬಂದಿದ್ದಾರೆ; ವಿಶೇಷವಾಗಿ ಹೆಣ್ಣು ಮತ್ತು ಅವಳ ಶೋಷಣೆಯ ಸುತ್ತಮುತ್ತಲ ವಿಷಯಗಳಿಗೆ. ಇನ್ನು ಪತ್ರಕರ್ತರಾಗಿಯೂ ಹಲವಾರು ವಿಷಯಗಳನ್ನು ದಿಟ್ಟವಾಗಿ ಎತ್ತಿಕೊಂಡವರವರು. ಕೆಲವು ಸತ್ಯಗಳ ಮೂಲ ಶೋಧಿಸಲು ತಾವೆ ಬಲಿಪಶು ಆಗಲು ಅಥವ ಖೆಡ್ಡಾಕ್ಕೆ ಕೆಡವುವ ಬೇಟೆಗಾರನಾಗಲೂ ಹಿಂಜರಿಯದವರು. ತಮ್ಮ ಸಹಲೇಖಕಿಯರಿಂದ ಪ್ರತಿಭಾರವರಷ್ಟು ಪ್ರೀತಿಸಲ್ಪಟ್ಟ ಅಥವ ದ್ವೇಷಿಸಲ್ಪಟ್ಟ ಮತ್ತೊಬ್ಬ ಕನ್ನಡದ ಲೇಖಕಿ ಇಲ್ಲ ಎಂದು ಹೇಳಿದರೆ ಅದು ತಪ್ಪಾಗುವುದಿಲ್ಲ ಎಂದುಕೊಳ್ಳುತ್ತೇನೆ. ಅದು ಅವರ ಸಾಮರ್ಥ್ಯವನ್ನಷ್ಟೇ ಅಲ್ಲದೆ ಅವರ ವೈವಿಧ್ಯಮಯ, ಚಲನಶೀಲ, ಪ್ರಯೋಗಶೀಲ, ವಿವಾದಾತ್ಮಕ, ನಿರ್ಭೀತ ವ್ಯಕ್ತಿತ್ವವನ್ನು ತೋರಿಸುತ್ತದೆ.

ಹಿಂದಿನ ಬ್ಲಾಗ್ ಲೇಖನದಲ್ಲಿ ಸುಗತ ರಾಜು ತಮ್ಮ ಇಂಗ್ಲಿಷ್ ಲೇಖನದಲ್ಲಿ ಕನ್ನಡದ ಎರಡು ಕವಿತೆಗಳನ್ನು ಪ್ರಸ್ತಾಪಿಸಿದ್ದಾರೆ ಎಂತಲೂ ಅದರಲ್ಲಿ ಒಂದು ಕವನ ಪ್ರತಿಭಾ ನಂದಕುಮಾರ್‌ರವರದು ಎಂತಲೂ ಬರೆದಿದ್ದೆ. ಆ ಲೇಖನದ ಬರೆದ ನಂತರ ಪ್ರತಿಭಾರವರ ಕವನವನ್ನೂ ಒಮ್ಮೆ ಓದಬೇಕೆನಿಸಿತು. ಹಾಗೆಯೆ ಸಾಧ್ಯವಾದರೆ ಅದನ್ನೂ ಕೇಳಬೇಕೆನಿಸಿತು. ಕೂಡಲೆ ಪ್ರತಿಭಾರವರಿಗೆ ಪತ್ರ ಬರೆದೆ. ಅವರು ತಮ್ಮ ಕವನ ಕಳುಹಿಸಿದರು. ಹಾಗೆಯೆ ತಮ್ಮ ಕವನದ ವಾಚನವನ್ನೂ ಇಷ್ಟರಲ್ಲೆ ಕಳುಹಿಸುವುದಾಗಿ ತಿಳಿಸಿದರು. ಈಗ ಅವರ ಕವನ ಮಾತ್ರ ಇಲ್ಲಿ ಕೊಡುತ್ತಿದ್ದೇನೆ. ಅವರ ವಾಚನದ ಆಡಿಯೋ ಬಂದನಂತರ ಅದರ ಲಿಂಕ್ ಸಹ ಇದೇ ಬ್ಲಾಗ್‌ನಲ್ಲಿ ಕೊಡುತ್ತೇನೆ.

"ದೇವಿ"
ಕವಿ: ಪ್ರತಿಭಾ ನಂದಕುಮಾರ್

ಅವಳು ಮಲವಿಲ್ಲದ ನಿರ್ಮಲೆ.
ಅವಳು ಲೋಲಾಕ್ಷಿಕಾಮರೂಪಿಣಿ

ಕಾಮಕ್ಕೆ ಯೋಗೇಶ್ವರಿ, ಕ್ರೋಧಕ್ಕೆ ಮಾಹೇಶ್ವರಿ
ಲೋಭಕ್ಕೆ ವೈಷ್ಣವಿ, ಮದಕ್ಕೆ ಬ್ರಹ್ಮಾಣಿ,
ಮೋಹಕ್ಕೆ ಸ್ವಯಂಭು ಕಲ್ಯಾಣಿ, ಮಾತ್ಸರ್ಯಕ್ಕೆ ಇಂದ್ರಜಾ
ಪೈಶುನ್ಯಕ್ಕೆ ಯಮದಂಡಭಧ್ರಾ, ಅಸೂಯೆಗೆ ವಾರಾಹೀ.

ದೇವಿಯೆಂದರೆ ಇಚ್ಚಾಶಕ್ತಿಜ್ಞಾನಶಕ್ತಿಕ್ರಿಯಾಶಕ್ತಿಸ್ವರೂಪಿಣಿ.

ಅವಳು ರುಧಿರಸ್ಥಿತಾ, ಮಾಂಸನಿಷ್ಠಾ, ಮಧುಪ್ರೀತಾ,
ಮಾಧ್ವೀಪಾನಾಲಸಾಮತ್ತಾ, ಬಲಿಪ್ರಿಯಾ, ಸುಖಾರಾಧ್ಯಾ,
ಲಾಸ್ಯಪ್ರಿಯಾ, ವಿಶೃಂಖಲಾ, ರತಿಪ್ರಿಯಾ, ಕಾಮಕೇಲಿತರಂಗಿತಾ

ಶಕ್ತಿ ದೇವಿಯ ಯೋಗವಿಲ್ಲದಿದ್ದರೆ
ಬ್ರಹ್ಮ, ವಿಷ್ಣು, ರುದ್ರ, ಈಶ್ವರ, ಸದಾಶಿವರು
ಪ್ರೇತಗಳಂತೆ ನಿಶ್ಚಲರು
ಅವಳು ಅವರನ್ನೇರಿ ಕುಳಿತ ಪಂಚಪ್ರೇತಾಸನಾಸೀನಾ

ಅವನು ಶುದ್ಧಜ್ಞಾನಸ್ವರೂಪನಾದರೆ ಅವಳು ವಿಮರ್ಶಾಸ್ವರೂಪಳು.
ಅವಳು ಅಂತರ್ಮುಖಸಮಾರಾಧ್ಯಾ ಬಹಿರ್ಮುಖಸುದುರ್ಲಭಾ
ಅವಳು ಕಾಮೇಶಿ, ಕಾಮಿತಾರ್ಥದಾ, ಕಾಮಸಂಜೀವಿನೀ, ಕಾಮದಾಯಿನೀ
ಅವಳು ಲಬ್ಧಪತಿಃ ಲಬ್ಧಭೋಗಾ ಲಬ್ಧಸುಖಾ ಲಬ್ಧಕಾಮಾ
ತನ್ನಿಚ್ಚೆಯಂತೆ ಪತಿ, ಭೋಗ, ಸುಖ, ಕಾಮವನ್ನು ಹೊಂದಿದವಳು.

ಅವಳು ಕುಡಿಯಬಹುದು, ಕುಣಿಯಬಹುದು, ಕೇಳಿಯಲ್ಲಿ ಮುಳುಗಿ ತೇಲಬಹುದು
ಹಿಡಿಯಲಾರಿರಿ ನೀವು ಅವಳನ್ನು ಪಬ್ಬುಗಳಲ್ಲಿ
ಹೊಡೆದು ಕೆಡವಿ ದಕ್ಕಿಸಿಕೊಳ್ಳಲಾರಿರಿ
ಮಬ್ಬು ಬೆಳಕಲ್ಲಿ ಕಾಣಲಾರಿರಿ ನಿಮ್ಮ ಮಂಜುಕಣ್ಣುಗಳಲ್ಲಿ
ಎದ್ದುಬರುತ್ತಾಳೆ ನೂರು ನಾಲಿಗೆ ಚಾಚಿ ರಕ್ತ ಹೀರುತ್ತ
ಅವಳ ಬೊಗಸೆಯೊಳಗೆ ನೀವು ಆಪೋಶನ
ಸಿಂಧೂರ ಕೇಸರಿಗೆ ಅವಳೇ ಅಧಿದೇವತೆ
ನಿಮ್ಮದೆಲ್ಲ ಬರಿ ನೀರಿಗೆ ಕರಗುವ ಗುಲಾಲು
ಗಲ್ಲಿಯಲ್ಲಿ ನುಸುಳಿ ಕಂಬದ ಮರೆಯಿಂದ ಮುಲುಗುಡುವ
ನಿರ್ವೀರ್ಯರು ಬಲ್ಲಿರೇನಯ್ಯಾ ಅವಳ ಹುಟ್ಟಿನ ಕುಲವ
ಪೀಠಸ್ಥೆಯನ್ನು ಅರ್ಚಿಸಿ ಭಜಿಸಿ ನೈವೇದ್ಯ ಭುಜಿಸಿ ತಿಲಕ ಧರಿಸಿ
ಮಡದಿಯ ಕಾಡಿಗಟ್ಟಿದವನ ಹೆಸರಲ್ಲಿ ಕವಿದು ಬಿದ್ದರು
ಹರಿಯ ಚರಣದಲಿ ಹರನ ಸತಿಯ ಮರೆತು

ಕಲಿತು ಬನ್ನಿರಿ ಮೊದಲು ಕ್ಷರ ಅಕ್ಷರಗಳ
ಹ್ರಸ್ವ ದೀರ್ಘ ಒತ್ತಕ್ಷರ ಓತ್ವ ಅಲ್ಪ ಮಹಾಪ್ರಾಣಗಳ
ತೊಳೆದುಬನ್ನಿರಿ ಕಾಲು ಕಳೆದು ಹೊರಗಿನ ಮಲಗಳ
ಎರಗಿ ನಿಲ್ಲಿರಿ ಅಲ್ಲೇ ಬಾಗಿ ಮೈಕೈಗಳ
ಹೂಹಣ್ಣುಗಳ ಬಿಡಿ ಕಾಯಿ ಕರ್ಪೂರವೂ ಬೇಡಾ
ದಕ್ಷಿಣೆಯ ತಟ್ಟೆಗೆ ಬೀಳದಿದ್ದರು ಝಣಝಣ
ತೊದಲು ನಾಲಿಗೆಯಲ್ಲಿ ರಾತ್ರಿಯ ಇಳಿಯದ ನಶೆಯಲ್ಲಿ
ಮಂತ್ರ ಬಾರದು ಸ್ವಸ್ತಿ ಸರಾಗವಲ್ಲ ಅರ್ಚನೆಯ ಕುಂಕುಮ ಗಂಧವಿಲ್ಲ

ಆದರೂ ಒಲಿಯಬಹುದು ಅವಳು ಹೇಳಲಾಗದು
ನಿಮ್ಮ ಎದೆಯೊಳಗೆ ಇದ್ದರೆ ಪ್ರೇಮ
ಅರಿತರೆ ನೀವು ಅವಳು ಬರಿಯ ಬೊಂಬೆಯಲ್ಲ
ಹಾಡಿದರೆ ತಾಯಿ ಹರಸಿದರೆ ದೇವಿ.
ಒಲಿದರೆ ರತಿ ಕೆರಳಿದರೆ ಕಾಳಿ.


ಪೂರಕ ಓದಿಗೆ: ಹಿಂದೊಮ್ಮೆ (2004 ರಲ್ಲಿ ) "ಸಿಲ್ವಿಯಾ ಪ್ಲಾತ್‌ : ಬೆಂಕಿಯಲ್ಲಿ ಅರಳಿ ಶೈತ್ಯದಲ್ಲಿ ಕಮರಿದ ಹೂವು" ಎಂಬ ಲೇಖನ ಬರೆದಿದ್ದೆ. ಅದು ದಟ್ಸ್‌ಕನ್ನಡದಲ್ಲಿ ಪ್ರಕಟವಾಗಿತ್ತು. ಅದರಲ್ಲಿ ಪ್ರತಿಭಾರವರ ಬಗ್ಗೆಯೂ ಮತ್ತು ಖುಷ್‌ವಂತ್ ಸಿಂಗ್ ತಮ್ಮ ಅಂಕಣದಲ್ಲಿ ಅವರನ್ನು ಉಲ್ಲೇಖಿಸಿ ಬರೆದಿದ್ದರ ಬಗ್ಗೆಯೂ ಬರೆದಿದ್ದೆ.

Jul 1, 2009

ಓಂಕಾರ ಉರುಳಾಗಿ, ಅರ್ಧಚಂದ್ರ ಕತ್ತಿಯಾಗಿ, ಶಿಲುಬೆ ಬಡಿಗೆಯಾಗಿ...

ಇವತ್ತಿನ ಸುದ್ದಿ: ದ.ಕ, ಉಡುಪಿ: ವ್ಯಾಪಕ ಮಳೆ (ಪ್ರಜಾವಾಣಿ, ಜುಲೈ 2, 09)

ಎರಡುಮೂರು ವಾರದ ಹಿಂದೆ Outlook ಪತ್ರಿಕೆಯ ತಮ್ಮ "Bangalore Byte"ನಲ್ಲಿ ಸುಗತ ರಾಜು "A Poetic Implosion" ಎನ್ನುವ ಲೇಖನ ಬರೆದಿದ್ದರು. ಮಂಗಳೂರಿನಿನಲ್ಲಿ ಶ್ರೀರಾಮ ಸೇನೆ ಹೆಂಗಸರ ಮೇಲೆ ದಾಳಿ ಮಾಡಿದ್ದು ಚುನಾವಣೆಯಲ್ಲಿ ಯಾವುದೇ ತರಹದ ಕೋಪೋದ್ರಿಕ್ತ ಪ್ರತಿಕ್ರಿಯೆಯನ್ನು ತೋರಿಸದಿದ್ದರೂ ಕನಿಷ್ಟ ಎರಡು ಉತ್ತಮ ಕವನಗಳಿಗೆ ಜನ್ಮ ನೀಡಿತು ಎಂದು ಅದರಲ್ಲಿ ಅವರು ಬರೆದಿದ್ದರು. ಅದು ಎರಡು ಕನ್ನಡ ಕವನಗಳ ಬಗ್ಗೆ. ಅವರು ಉದಾಹರಿಸಿದ್ದ ಮೊದಲ ಕವನ ಕನ್ನಡದ ಪ್ರಸಿದ್ಧ ಕವಯತ್ರಿ ಪ್ರತಿಭಾ ನಂದಕುಮಾರ್‌‍ರದು. ಎರಡನೆಯ ಕವನ ಉದಯೋನ್ಮುಖ ಕವಯತ್ರಿ ಭಾರತಿ ದೇವಿಯವರದು.

ಏಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ನಡೆದ ಸಂವಹನ ಕಾರ್ಯಕ್ರಮದಲ್ಲಿ ಭಾರತಿಯವರನ್ನು ಭೇಟಿಯಾಗಿದ್ದೆ. ಅವರು ಕವಯತ್ರಿ ಎಂದು ಗೊತ್ತಿರಲಿಲ್ಲ. ಹಾಗಾಗಿ ಸುಗತ ಪ್ರಸ್ತಾಪಿಸಿದ್ದ ಭಾರತಿ ದೇವಿ ಯಾರು ಎಂದು ನನಗೆ ಖಚಿತವಾಗಿ ಹೊಳೆಯಲಿಲ್ಲ. ಅನುವಾದದ ವಿಷಯವೊಂದಕ್ಕೆ ನಾವಿಬ್ಬರೂ ಒಂದೆರಡು ಬಾರಿ ಇಮೇಲ್ ಸಂಪರ್ಕದಲ್ಲಿದ್ದರೂ ಅವರೆ ಈ ಕವಯತ್ರಿ ಎಂದು ಖಾತ್ರಿ ಇರಲಿಲ್ಲ. ಅವರ ಇಮೇಲ್ ಹೆಸರಿನಲ್ಲಿ "ದೇವಿ" ಇರಲಿಲ್ಲ!. ಖಾತ್ರಿಯಾದ ನಂತರ ಅವರ ಕವನ ಮತ್ತು ಅದರ ವಾಚನವನ್ನು ಕಳುಹಿಸಲು ಕೋರಿದ್ದೆ.

ಕವಯತ್ರಿ ಸವಿತಾ ನಾಗಭೂಷಣರ ಕವನ ವಾಚನದ ವಿಡಿಯೊ ಬಗ್ಗೆ ಬರೆಯುತ್ತ ಹಿಂದೊಮ್ಮೆ ನನ್ನ ಕವನಗ್ರಾಹ್ಯದ ಬಗ್ಗೆ ಬರೆದಿದ್ದೆ. ಮನಸ್ಸಿನಲ್ಲಿ ಕವನ ಓದಿಕೊಳ್ಳುವುದಕ್ಕಿಂತ ಅದರ ಗಟ್ಟಿ ಓದು ಅಥವ ಕವಿಗಳಿಂದಲೆ ಕೇಳುವ ಅದರ ವಾಚನ ನಿಜಕ್ಕೂ ಅದ್ಭುತ. ಇಲ್ಲಿ ಭಾರತಿ ದೇವಿಯವರ ಕವನ ಮತ್ತು ಅದರ ಆಡಿಯೊ ರೂಪ ಇದೆ. ಮಂಗಳೂರಿನ ಕನ್ನಡಿಗರ ವಿಭಿನ್ನ ಕನ್ನಡದ ಗತ್ತಿನಲ್ಲಿ ಸ್ವತಃ ಕವಿ ವಾಚಿಸಿದ್ದಾರೆ. ಓದಿ. ಕೇಳಿ.

ಅವಳಿಗೆ ನಗಲು ಅನುಮತಿ ಇಲ್ಲ, ಅಳಲು ಕಣ್ಣೀರಿಲ್ಲ...
ಕವಿ: ಭಾರತಿ ದೇವಿ

ನೇತ್ರಾವತಿಯ ನಗು ಬಂಡೆಗಳಿಗೆ ಬಡಿದೂ ಬಡಿದೂ
ಕೊನೆಗೊಮ್ಮೆ ಚಿಂದಿಯಾಗಿ ಇಲ್ಲವಾಯಿತು
ಅವಳು ಕಣ್ಣೀರು ಹರಿಸಿ ಹರಿಸಿ
ಬತ್ತಿಹೋಗಿದ್ದಾಳೆ...
ಅವಳ ಬೋಳು ಬಂಡೆಗಳ ಸಹಜ ಬೆತ್ತಲೆಗೆ
ಕೇಸರಿ ಬಟ್ಟೆ ಹೊದೆಸಲಾಗಿದೆ...
ನೇತ್ರಾವತಿಯ ತುಂಬಾ ಬಂಡೆಗಳು
ಅಲ್ಲಿ ಯಾವುದೂ ಸುರಳೀತ ಹರಿದುಹೋಗುವುದಿಲ್ಲ!

ಅವಳ ಮಕ್ಕಳು ಜೊತೆಗೆ ಕಿಲಿಕಿಲಿ ನಗುವಾಗ
ಕತ್ತಿ, ದೊಣ್ಣೆ, ಚೂರಿ ಹಿಡಿದ ’ಅವರು’ ಬರುತ್ತಾರೆ
ನೇತ್ರಾವತಿ ಬೆಚ್ಚಿ ’ಮಗಳನ್ನು’ ಚಿಂದಿಸೀರೆಯಡಿ
ಅಡಗಿಸಿ ಅತ್ತಿತ್ತ ನೋಡುತ್ತಾಳೆ
ಸ್ವಾತಂತ್ರ್ಯ ದೇವತೆಗೆ ಚರಮ ಗೀತೆ ಹಾಡುತ್ತಾಳೆ

ಅವಳೂರ ಯಾವ ಬಸ್ಸುಗಳೂ ಈಗ
ನಗು, ಮಾತುಗಳಿಂದ ಗಿಜಿಗುಡುವುದಿಲ್ಲ
ಅವಳೂರ ಅಂಗಡಿ ಕಟ್ಟೆಗಳಲ್ಲಿ ಈಗ
ಉಲ್ಲಾಸದ ಕಲರವವಿಲ್ಲ
ಜತೆಗೆ ಕುಳಿತವನ ಕಣ್ಣಲ್ಲೇ ಇರಿದು ಮಹಜರು ಮಾಡಿ
ಓಂಕಾರ ಉರುಳಾಗಿ, ಅರ್ಧಚಂದ್ರ ಕತ್ತಿಯಾಗಿ, ಶಿಲುಬೆ ಬಡಿಗೆಯಾಗಿ
ಎಲ್ಲೆಲ್ಲೂ ಹಸಿ ಹಸಿ ವಾಸನೆ
ಈಗೀಗ ಮಳೆಗಾಲ ಕಳೆದರೂ ನೇತ್ರಾವತಿಯ ಕೆಂಪು ನೀರು
ತಿಳಿಯಾಗುತ್ತಿಲ್ಲ...

ಎಲ್ಲರಿಗೂ ಜನ್ಮ ನೀಡಿ ಮಡಿಲಲ್ಲಿ ಸಾಕಿ ಸಲಹಿ ಪೊರೆದ
ತಾಯಿಯ ಒಡಲೆಲ್ಲ ಹುಣ್ಣಾಗಿ ಕೀವು ತುಂಬಿ
ಒಂದೇ ಮಗ್ಗುಲು ಸಾಕಾಗಿ ಹೊರಳಲು ಯತ್ನಿಸುತ್ತಾಳೆ
ನೆಲಕ್ಕಂಟಿದ ಆಕೆಗೆ ಹೊರಳುವುದೂ ಸುಲಭವಲ್ಲ
ತನ್ನ ಮೈಗಂಟಿದ ಈ ಕಲೆಯನ್ನೆಲ್ಲ ಕಳೆಯುವುದು ಹೇಗೆ?
ದುರ್ಗಂಧ ತೊಳೆಯುವುದು ಹೇಗೆ?
ತುಂಬಿ ಭೋರ್ಗರೆದು ಎಲ್ಲವನ್ನೂ ಕೊಚ್ಚಿಹಾಕಬಾರದೇಕೆ?
ಬತ್ತಿ ಬೇಯುತ್ತಿರುವ ತಾಯಿ ನೇತ್ರಾವತಿಗೀಗ
ಮುಂಗಾರಿನದೇ ಧ್ಯಾನ...


ಭಾರತಿ ದೇವಿಯವರಿಂದ ಇದರ ವಾಚನ:



ಇಲ್ಲಿಂದ .mp3 File ಅನ್ನು ಡೌನ್‌ಲೋಡ್ ಸಹ ಮಾಡಿಕೊಳ್ಳಬಹುದು.

ಮತ್ತೆ ಇವತ್ತಿನ ಸುದ್ದಿಗೆ: ಈ ಒಂದೇ ಮುಂಗಾರು ನೇತ್ರಾವತಿಯ ಆಶಯವನ್ನು ಈಡೇರಿಸುತ್ತದೆಯೆ?